
ರಾಯಚೂರು : ಮಾರ್ಚ್ 13ರಂದು ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನವನ್ನು ಆಯೋಜನೆ ಮಾಡಲಾಗುತ್ತಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಕಡ್ಡಾಯವಾಗಿ ಕರೆತರುವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕುವಾರು ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ, ಮಾಹಿತಿ ಸಲ್ಲಿಸಬೇಕು. ಸರ್ಕಾರದಿಂದ ಮಂಜೂರಾದ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಕರೆತರಬೇಕು. ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಪ್ರಮುಖ ಇಲಾಖೆಗಳಲ್ಲಿರುವ ಈ ವರ್ಷದ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯಗಳನ್ನು ಸಮ್ಮೇಳನದಲ್ಲಿ ಸಾಂಕೇತಿಕವಾಗಿ ನೀಡಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆಯ ರಾಜ್ಯ ಸರ್ಕಾರದ ಯೋಜನೆಗಳಾದ ರೈತ ವಿದ್ಯಾನಿಧಿ ಯೋಜನೆ, ರೈತ ಶಕ್ತಿ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳನ್ನು ನೀಡಬೇಕು. ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಜೊತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಹಾಗೂ ಆಯುಷ್ಮಾನ್ ಭಾರತ ಯೋಜನೆಯ ವಿವಿಧ ಸೌಲಭ್ಯಗಳಿಗೆ ನೊಂದಣಿ ಮಾಡಿಕೊಳ್ಳುವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಫಲಾನುಭವಿಗಳನ್ನು ಸೇರಿಸುವ ವಿಷಯದಲ್ಲಿ ಕಡ್ಡಾಯವಾಗಿ ಈಗಾಗಲೇ ನೀಡಿದ ಗುರಿಯನ್ನು ತಲುಪಬೇಕು. ಫಲಾನುಭವಿಗಳನ್ನು ಕರೆತರುವಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು.
ಮಾರ್ಚ್ 6ರೊಳಗಾಗಿ ಪ್ರತಿ ಇಲಾಖೆಯ ಅಧಿಕಾರಿಗಳು ಎಷ್ಟು ಫಲಾನುಭವಿಗಳು ಸಮ್ಮೇಳನಕ್ಕೆ ಬರುತ್ತಾರೆ. ಅದರಲ್ಲಿ ಸಾಂಕೇತಿಕವಾಗಿ ವೇದಿಕೆಯ ಮೇಲೆ ಪ್ರಮಾಣ ಪತ್ರ ಹಾಗೂ ವಿವಿಧ ಯೋಜನೆಗಳ ಸಲಕರಣೆಗಳನ್ನು ನೀಡುವ ಕುರಿತು ಹಾಗೂ ಇಲಾಖೆಗಳಿಂದ ಸ್ಥಾಪಿಸಲಾಗುವ ಮಳಿಗೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಿಕೊಳ್ಳಬೇಕು ಮತ್ತು ವರದಿಯನ್ನು ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]