ಭೂಮಾನಂದ ಸೇರಿದಂತೆ ದಲಿತ ಮಹಿಳೆಯರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ರಾಯಚೂರಿನಲ್ಲಿ ಬೃಹತ್ ಬೈಕ್ ರ್ಯಾಲಿ ಹಾಗೂ ಬಹಿರಂಗ ಸಮಾವೇಶ ನಡೆಯಿತು.
ನಗರದ ವಿವಿಧ ಭಾಗಗಳಿಂದ ಆಗಮಿಸಿದ ಮುಖಂಡರು ಮತ್ತು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದರು. ಬಳಿಕ ನಡೆದ ಬಹಿರಂಗ ಸಮಾವೇಶದಲ್ಲಿ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಈ ವೇಳೆ ವೇದಿಕೆಯಲ್ಲೇ ಕೆಲ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ಪೊಲೀಸರು ಮಧ್ಯಪ್ರವೇಶಿಸಿ, ಗಲಾಟೆಯನ್ನು ನಿಯಂತ್ರಿಸಿದರು. ಬಳಿಕ ಸಮಾವೇಶ ಮುಂದುವರಿಯಿತು.