ರಾಯಚೂರು: ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22) ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ವೇಳೆ ಅಶ್ವಿನಿ ನಾಪತ್ತೆಯಾಗಿದ್ದಳು. ಕುಟುಂಬಸ್ಥರು ಹಾಗೂ ಸ್ಥಳೀಯರು ಆಕೆಯನ್ನು ಹುಡುಕಾಟ ನಡೆಸಿದ್ದರು. ಈ ನಡುವೆ ಬೆಳಗ್ಗೆ ರೈತರು ಜಮೀನಿಗೆ ತೆರಳಿದಾಗ ಬಾವಿಯಲ್ಲಿ ಯುವತಿಯ ಮೃತದೇಹ ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿಯ ಸಾವಿನ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿರುವ ಶಂಕೆ ಸ್ಥಳೀಯರಿಂದ ವ್ಯಕ್ತವಾಗಿದೆ. ಆದರೆ ಸಾವಿನ ನಿಖರ ಕಾರಣ ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ಬಳಿಕವೇ ತಿಳಿದುಬರಬೇಕಿದೆ.
ಇನ್ನೊಂದು ಆತಂಕಕಾರಿ ವಿಚಾರವೆಂದರೆ, ಅಶ್ವಿನಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು ಎನ್ನಲಾಗಿದೆ. ಹೀಗಾಗಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದು, ಯುವತಿ ನಾಪತ್ತೆಯಾಗಿದ್ದ ಸಂದರ್ಭದಿಂದ ಹಿಡಿದು ಮೃತದೇಹ ಪತ್ತೆಯಾಗುವವರೆಗಿನ ಎಲ್ಲಾ ವಿಚಾರಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.