ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರ ಸಹೋದರ ನಡುವೆ ವಾಗ್ವಾದ ನಡೆದು, ಬಳಿಕ ಎರಡು ಗುಂಪುಗಳ ನಡುವೆ ನೂಕಾಟ-ತಳ್ಳಾಟ ನಡೆದಿದೆ.
ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ಕರಿಯಪ್ಪ ವಜ್ಜಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ನಡುವೆ ಹಣದ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಪರಸ್ಪರ ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಬೆಂಬಲಿಗರು ಪರಸ್ಪರ ಕೈಕೈ ಮಿಲಾಯಿಸಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ನಿಮ್ಮ ಹೆಂಡತಿಯನ್ನು ಜಿ.ಪಂ ಸದಸ್ಯ ಮಾಡಲು ಹಗಲು-ರಾತ್ರಿ ಓಡಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರಿಯಪ್ಪ ವಜ್ಜಲ್, ಯಾರೂ ಸುಮ್ಮನೆ ಮಾಡಿಲ್ಲ, ಅವರಿಗೆ ಹಣ ನೀಡಿದ್ದೇನೆ ಎಂದು ಹೇಳಿದ್ದಾರೆ. ಘಟನೆ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.