ರಾಯಚೂರು: ಕೇವಲ 10 ರೂಪಾಯಿ ಪೆಟ್ರೋಲ್ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ನಡೆದಿದ್ದು, ಮೇಘನಾಥ್ (42) ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ, ಬಾಟಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಮತ್ತು ಪೆಟ್ರೋಲ್ ಬಂಕ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಪೆಟ್ರೋಲ್ ಖರೀದಿಸುವ ವೇಳೆ ಕೇವಲ 10 ರೂಪಾಯಿ ವಿಚಾರಕ್ಕೆ ಆರಂಭವಾದ ಈ ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಜಗಳದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತನಿಗೆ ಸಹಾಯಕ್ಕಾಗಿ ಮೇಘನಾಥ್ಗೆ ಕರೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಮೇಘನಾಥ್ ಸ್ನೇಹಿತನ ಪರವಾಗಿ ಬಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದ್ದು, ಈ ವೇಳೆ ಎರಡೂ ಗುಂಪಿನ ನಡುವೆ ಮಾರಾಮಾರಿ ನಡೆದಿದೆ.
ಘರ್ಷಣೆಯ ಸಂದರ್ಭದಲ್ಲಿ ಕಟ್ಟಿಗೆಯಿಂದ ಪರಸ್ಪರ ಹಲ್ಲೆ ನಡೆದಿದ್ದು, ಮೇಘನಾಥ್ ಅವರಿಗೆ ತಲೆಗೆ ಹಾಗೂ ದೇಹಕ್ಕೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಂತರ ಎಡಕನೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.