ರಾಯಚೂರು: ಜಿಲ್ಲೆಯ ರಾಯಚೂರು ತಾಲೂಕಿನ ಚಂದ್ರಬಂಡ, ಕಡಗಂ ದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು ಶಾಲೆ ಹಾಗೂ ಕಾಲೇಜಿಗೆ ನಿತ್ಯ ಜೀವಭಯದಲ್ಲೇ ಪ್ರಯಾಣಿಸುವ ದುಸ್ಥಿತಿ ಎದುರಿಸುತ್ತಿದ್ದಾರೆ. ಈ ಭಾಗದಿಂದ ರಾಯಚೂರಿಗೆ ಸಂಚರಿಸುವ ಸರ್ಕಾರಿ ಬಸ್ ಒಂದೇ ಇರುವುದರಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಅದೇ ಬಸ್ಸನ್ನು ಅವಲಂಬಿಸಬೇಕಾಗಿದೆ.
ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಮಿತಿಮೀರುತ್ತಿದ್ದು, ವಿದ್ಯಾರ್ಥಿಗಳು ಉಸಿರುಗಟ್ಟುವ ಪರಿಸ್ಥಿತಿಯಲ್ಲಿ ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ. ಕೆಲವರು ಬಸ್ಸಿನ ಒಳಭಾಗದಲ್ಲಿ ಕಿಕ್ಕಿರಿದು ನಿಂತರೆ, ಇನ್ನೂ ಹಲವರು ಬಾಗಿಲಲ್ಲಿ ಜೋತಾಡುತ್ತಾ ಒಂದೇ ಕಾಲಿನ ಮೇಲೆ ನಿಂತು ಪ್ರಯಾಣಿಸುತ್ತಿದ್ದಾರೆ. ಇದರಿಂದ ಅಪಘಾತ ಸಂಭವಿಸುವ ಭೀತಿ ಹೆಚ್ಚಾಗಿದ್ದು, ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಶಿಕ್ಷಣಕ್ಕಾಗಿ ಪ್ರತಿದಿನ ಈ ಸಂಕಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ-ಕಾಲೇಜು ವೇಳೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಓಡಿಸುವಂತೆ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ ಒತ್ತಾಯಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.