ದೇವದುರ್ಗ : ಆರು ಎಕರೆ ಜಮೀನು ವಿವಾದಕ್ಕಾಗಿ ದಾಯಾದಿಗಳು ನಡೆಸಿದ ಮಾರಣಾಂತಿಕ ಹಲ್ಲೆಗೆ ಕೊನೆಗೂ ಒಂದು ಜೀವ ಬಲಿಯಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮ್ಯಾದರಗೋಳ ಗ್ರಾಮದಲ್ಲಿ ನಡೆದಿದ್ದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಶಿವಣ್ಣ ಎಂಬುವವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲ್ಲೆಗೊಳಗಾದ ಮತ್ತೊಬ್ಬ ಸಂತ್ರಸ್ತ ಬಸನಗೌಡ ಎಂಬುವವರ ಸ್ಥಿತಿ ಇನ್ನು ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಖಾರದ ಪುಡಿ ಎರಚಿ ಕ್ರೂರ ಹಲ್ಲೆ :
ದಾಯಾದಿಗಳಾದ ಭೀಮರಾಯ, ರಂಗಪ್ಪ, ನಾಗರಾಜ, ಹನುಮಗೌಡ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಕಣ್ಣಿಗೆ ಖಾರದ ಪುಡಿ ಎರಚಿ ಮಚ್ಚು, ಕಲ್ಲು ಹಾಗೂ ದೊಣ್ಣೆಗಳಿಂದ ಈ ಇಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.
ಕುಟುಂಬಸ್ಥರ ಆಕ್ರೋಶ ಮತ್ತು ಅಸಮಾಧಾನ :
ಆಆರೋಪಿಗಳು ಮಚ್ಚು ಮತ್ತು ಕೊಡಲಿಯಿಂದಲೇ ಹಲ್ಲೆ ನಡೆಸಿದ್ದರೂ, ಪೊಲೀಸರು ಎಫ್ಐಆರ್ನಲ್ಲಿ (FIR) ಈ ಮಾರಕಾಸ್ತ್ರಗಳ ಉಲ್ಲೇಖವನ್ನೇ ಮಾಡಿಲ್ಲ" ಎಂದು ಮೃತರ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪತ್ನಿ ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ.
ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.