ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಎದುರಾಗಿದೆ. 2026-31ನೇ ಸಾಲಿನ ಅವಧಿಗೆ ನಡೆಯಬೇಕಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಹೈಕೋರ್ಟ್ ಆದೇಶವನ್ನೂ ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗ್ರಾಮ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ಸರ್ಕಾರ ನ್ಯಾಯಾಲಯದ ಮುಂದೆ ಕ್ಷಮೆಯಾಚಿಸಿ, ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 8 ವಾರಗಳ ಕಾಲಾವಕಾಶ ಪಡೆದಿದೆ. ಮೀಸಲು ನಿಗದಿ ಕಾರ್ಯವನ್ನು ಪೂರ್ಣಗೊಳಿಸಲು 30 ದಿನಗಳ ಗಡುವು ನೀಡಲಾಗಿದೆ.
ಚುನಾವಣಾ ಪ್ರಕ್ರಿಯೆ ಆರಂಭಿಸಲು ಮೀಸಲು ಪಟ್ಟಿ ಅಂತಿಮಗೊಳಿಸುವುದು ಪ್ರಮುಖ ಹಂತವಾಗಿದ್ದು, ಇದಾದ ಬಳಿಕವೇ ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ವೇಳಾಪಟ್ಟಿ ಪ್ರಕಟಣೆ ಸೇರಿದಂತೆ ಇತರೆ ಪ್ರಕ್ರಿಯೆಗಳು ನಡೆಯಬೇಕಿದೆ.
ಸದ್ಯದ ಬೆಳವಣಿಗೆಗಳ ಪ್ರಕಾರ, ಈ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ತಕ್ಷಣ ನಡೆಯುವ ಸಾಧ್ಯತೆ ಕಡಿಮೆ ಇದೆ. ಮೀಸಲು ನಿಗದಿ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ಸಮಯ ಬೇಕಾಗಿರುವುದರಿಂದ ಮುಂದಿನ ಐದರಿಂದ ಆರು ತಿಂಗಳ ಬಳಿಕ, ಅಂದರೆ ಡಿಸೆಂಬರ್ ನಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಗ್ರಾಮೀಣ ಭಾಗದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪಂಚಾಯಿತಿ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವುದರಿಂದ ರಾಜಕೀಯ ವಲಯದಲ್ಲೂ ಚರ್ಚೆ ಜೋರಾಗಿದೆ. ಸರ್ಕಾರ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಂಡು ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.